Skip to main content

ಹುಲಿ ಬಂತು ಹುಲಿ

ನನ್ನೂರಿನ ಸರಹದ್ದಿನ ತೋಟವೊಂದಕ್ಕೆ ಹುಲಿ ಬಂದ ಬಗ್ಗೆ ಸುದ್ದಿಯೊಂದು ನಿನ್ನೆ ನಮ್ಮ ವಾಟ್ಸಾಪ್ ಗ್ರೂಪ್'ಗೆ ಬಂದಿತ್ತು. ಕಾಕತಾಳೀಯವೆಂಬಂತೆ ನಾನು ಅದೇ ಹೊತ್ತಿನಲ್ಲಿ ಮಲೆಗಳಲ್ಲಿ ಮದುಮಗಳು ಮಹಾ ಕಾವ್ಯದಲ್ಲಿನ ನಾಯಿಗುತ್ತಿ ದಾರಿಯಲ್ಲೆದುರಾದ ಹುಲಿಯನ್ನು ಓಡಿಸುವ ಪ್ರಸಂಗವನ್ನು ಓದುತ್ತಿದ್ದೆ!
ಹುಲಿಯನ್ನು ಬೆದರಿಸಿ ಓಡಿಸಿದ ನಂತರ ಗುತ್ತಿ ಮಾಮೂಲಿಯಾಗಿ ಹೆಜ್ಜೆ ಹಾಕುತ್ತಾನೆ.  ಹುಲಿಯೂ ಕೂಡಾ ಪರಿಸರದ ಉಳಿದೆಲ್ಲಾ ಪ್ರಾಣಿಗಳಂತೆ ಒಂದು ಪ್ರಾಣಿ ಅಷ್ಟೇ ಎಂಬಂತೆ.
ಅವತ್ತಿನ ಕಾಲಕ್ಕೆ ಅದು ನಿಜ ಕೂಡಾ.... ಒಂಚೂರು ಹೆಚ್ಚಿನ ಕಿರಿಕಿರಿಯ ಪ್ರಾಣಿ ಅಷ್ಟೇ.! 
 ಮನೆಯ ಪಕ್ಕದ ಹಟ್ಟಿಗೇ ಬಂದು ದನ ಮುರಿಯುತ್ತಿದ್ದ ಹುಲಿಯ ಕತೆಯನ್ನು ದಳಿಮನೆಯ ದೊಡ್ಡ ಕುರ್ಚಿಯಲ್ಲಿ ಕುಳಿತು ಅಜ್ಜಿ ತಣ್ಣಗೆ ಹೇಳುವಾಗ ಕೇಳುತ್ತಿದ್ದ ನಮಗೆ ಕೂದಲೆಲ್ಲಾ ನೆಟ್ಟಗಾಗುವಂಥಾ ರೋಮಾಂಚನ. ಕತೆ ಮುಂದುವರಿದಂತೆ ಗಳಿಗೆಗೊಮ್ಮೆ ದಳಿಯಾಚೆಯ ಕತ್ತಲಿನೊಳಕ್ಕೆ ಒಮ್ಮೆ ದೀರ್ಘವಾಗಿ ಹೊಕ್ಕು ಹುಡುಕುತ್ತಿದ್ದೆವು. ಹುಲಿ ಹೊರಗೆಲ್ಲಾದರೂ ಅವಿತು ಕುಳಿತು ಅಜ್ಜಿಯ ಕಥೆಗೆ ಕಿವಿಗಿವಿ ಕೊಡುತ್ತಿದೆಯೇನೋ ಎಂಬ ಅವ್ಯಕ್ತ ಅನುಮಾನ ನಮಗೆ.!
ಮಲೆನಾಡಿನ ಹಳೆಯ ಬಹುತೇಕ ಕತೆಗಳು ಹುಲಿಯೊಂದಿಗೇ ಮಿಳಿತವಾಗಿರುತ್ತಿತ್ತು. ಆದರೆ ಎಂದಿಗೂ ಹುಲಿ ಬಂತೆಂದು ಊರು ಬಿಟ್ಟ, ತೋಟ ಗದ್ದೆಗೆ ಹೋಗುವುದನ್ನು ಬಿಟ್ಟ ಉದಾಹರಣೆಗಳು ಇಲ್ಲವೇ ಇಲ್ಲ. ಹೆಚ್ಚೆಂದರೆ ಹುಲಿ ಕಾಟ ಮಿತಿಮೀರಿದರೆ ಕೋವಿ ಹಿಡಿದು ಬೆರಸಾಡಿ ಹುಲಿಯನ್ನೇ ಊರು ಬಿಡಿಸುತ್ತಿದ್ದರು.!
ಆದರೆ ಈಗ ಎಲ್ಲವೂ exaggeration ಮನಸ್ಥಿತಿ. ಮನೆಬಾಗಿಲಿಗೆ ಒಂದು ಹಾವು ಬಂದರೂ ಮಲೆನಾಡಿನ ಜನ ಸಣ್ಣಗೆ ಬೆವರುತ್ತಿದ್ದಾರೆ. ಹುಲಿ ಬಂದರಂತೂ ಊರು ಬಿಡುವ ಮಾತನಾಡುತ್ತಾರೆ. ಅರಣ್ಯ ಇಲಾಖೆಗೆ ಶಾಪ ಹಾಕತೊಡಗುತ್ತಾರೆ.  ಬಹುಶಃ ಬದಲಾದ ಸಾಮಾಜಿಕ ಸ್ಥಿತಿಗತಿಗಳು ಕಾರಣವೇನೋ...  ನಾವು Delicate ಆಗುತ್ತಿರುವುದರ ಸೂಚಕವೂ ಇರಬಹುದು.
ಎಲ್ಲದಕ್ಕಿಂತಾ ಹೆಚ್ಚಾಗಿ 'ಬದುಕಿಗಾಗಿ ಕೃಷಿ' ಎಂಬುದು ಮರೆಯಾಗಿ 'ಕೃಷಿಗಾಗಿಯೇ ಬದುಕು' ಎಂಬ ಕಾಲಮಾನದಲ್ಲಿ ಬದುಕುತ್ತಿರುವುದೂ ಕಾರಣವಿರಬಹುದೇನೋ... ಹೀಗಾಗಿ ನಮಗೀಗ ನಮಗಿಂತ ಶಕ್ತಿಶಾಲಿಯಾದ ಯಾವ ಜಂತುವೂ ನಮ್ಮ ಪರಿಸರದೊಳಕ್ಕೆ ಬರುವುದು ಸಹ್ಯವಾಗುತ್ತಿಲ್ಲ.!

Comments

Popular posts from this blog

Coffee culture V/S Coffee industry

 Coffee blossoms in Brazil. An anti Nature cultivation.  ಕೆಲವು ವರ್ಷಗಳ ಹಿಂದೆ ನಮ್ಮ ಚಿಕ್ಕಮಗಳೂರಿನ ಸುತ್ತಮುತ್ತಲಿನಲ್ಲಿ ಕೆಲವರು ಬ್ರೆಜಿಲ್ ಮಾದರಿಯ ಕಾಫಿ ಬೆಳೆಯುತ್ತೇವೆಂದು ಓಡಾಡತೊಡಗಿದರು. ಬ್ರೆಜಿಲ್ ಮಾದರಿಯಲ್ಲಿ ಕಡಿಮೆ ಖರ್ಚು, ಕಾರ್ಮಿಕರಹಿತವಾಗಿ ಯಂತ್ರಗಳ ಮೂಲಕ ಕುಯ್ಲು ಹಾಗೂ ಕಂಡು ಕೇಳರಿಯದಷ್ಟು ಇಳುವರಿಯಂತೆ...! ಎಂಬೆಲ್ಲಾ ಮಾತುಗಳು ಹರಿದಾಡತೊಡಗಿದವು.  ಬ್ರೆಜಿಲ್ ಮಾದರಿಯೆಂದರೆ ಹೆಂಗೆ ಬೆಳೆಯುತ್ತಾರೆ !?  ಒಮ್ಮೆ ಹೋಗಿ ನೋಡಬೇಕೆಂಬ  ಕುತೂಹಲ ಪ್ರಾರಂಭವಾಯಿತು.  ಒಂದು ದಿನ ಕಳಸಕ್ಕೆ ಹೋಗುತ್ತಿರುವಾಗ ಬಾಳೆಹೊಳೆಯ ಬಳಿ ತುಂಬಾ ಹಳೆಯ ರೋಬಸ್ಟಾ ತೋಟವೊಂದನ್ನು ಮರಗಳ ಸಮೇತ ಕಡಿದು ಬಟಾಬಯಲಾಗಿಸಿ ಸಾಲು ಸಾಲು ಪಾತಿಗಳಂತೆ   ಮಾಡಿ ಒಂದರ ಪಕ್ಕ ಒಂದರಂತೆ ಗಿಡಗಳನ್ನು ನೆಟ್ಟು ಹನಿ ನಿರಾವರಿ ಪೈಪುಗಳನ್ನು ಎಳೆಯುತ್ತಿದ್ದರು. ನೋಡಲು ಒಂದು ನಮೂನೆಯ ಟೀ ತೋಟದ ಮಾದರಿಯಲ್ಲಿತ್ತು. ಚಹಾ ತೋಟದಲ್ಲಾದರೂ ನಡುವೆ ಅಲ್ಲಲ್ಲಿ ಮರಗಳಿರುತ್ತವೆ ಇಲ್ಲಿ ಒಂದೇ ಒಂದು ಮರವನ್ನೂ ಬಿಡದಂತೆ ಕಡಿದುಹಾಕಿದ್ದರು.! ತೋಟದ ಸಮೀಪದಲ್ಲಿದ್ದ ಅಂಗಡಿಯೊಂದರಲ್ಲಿ, ಇದೇನು ಬೆಳೆಸುತ್ತಿದ್ದಾರೆ ? ಎಂದು ವಿಚಾರಿಸಿದೆ. 'ಎಂತದಾ ಬ್ರೆಜಿಲ್ ಕಾಪಿ ಬೆಳಿತಾರಂತೆ ಮಾರ್ರೆ ಭಯಂಕರ ಕಾಪಿ ಬಿಡ್ತದಂತೆ ಇನ್ಮೇಲೆ ಮಿಸಿನ್ನಲ್ಲಿ ಹಣ್ ಕುಯ್ಯದಂತೆ' ಎಂದರು. ಕೆಲವೇ ದಿನಗಳ ಹಿಂದೆ ಯಾವ ಬ್ರೆಜಿಲ್ ಮಾದರಿಯನ್ನು ನೋಡಬೇಕೆ...
 ಬೆಂಗಳೂರಿಗೆ ಹೊರಡುವ ಬಹುತೇಕ ನಿರುದ್ಯೋಗಿಗಳ ಚಿಂತೆ ಕೆಲಸ ಸಿಗುತ್ತದಾ ?  ಎನ್ನುವುದಕ್ಕಿಂತ ಉಳಿಯಲು ಕೊಠಡಿ ಸಿಗುತ್ತದಾ ? ಎನ್ನುವುದು. ಕಾರಣ ಪುಡಿಗಾಸು ಇಟ್ಟುಕೊಂಡು ಹೊರಡುವ ಹುಡುಗರು (ಬಹುತೇಕ ಹುಡುಗಿಯರು ಅದರಲ್ಲಿ ಜಾಣೆಯರು. ಕೆಲಸ , ಕೋಣೆಯನ್ನು  ಖಚಿತ ಪಡಿಸಿಕೊಂಡೇ ಹೊರಡುತ್ತಾರೆ.! ) ಸ್ವಂತದ ಕೋಣೆ ಬಾಡಿಗೆ ಪಡೆಯುವಷ್ಟು ಶಕ್ತಿಯಿರುವುದಿಲ್ಲ. ಹಾಗಾಗಿ ಬೆಂಗಳೂರಿಗೆ ಕೆಲಸ ಹುಡುಕಿ ಹೊರಡುವುದು ಒಂದು ರೀತಿಯ ಅನಿಶ್ಚಿತತೆಯ ಪ್ರಯಾಣ. ಇನ್ನು ಈ ಪ್ರಾಣಿ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದೆ ಎಂಬ ಮಾಹಿತಿ ಮೊದಲೇ ಬೆಂಗಳೂರಿಗೆ ಹೋಗಿ ಸೇರಿಕೊಂಡವರಿಗೆ ತಿಳಿದರೆ ಅವರು ಸತ್ತರೂ ಫೋನ್ ರಿಸೀವ್ ಮಾಡುವುದಿಲ್ಲ.  ಇನ್ನು ಕೆಲವರು ಕರೆ ಮಾಡಿದಾಗಲೆಲ್ಲಾ ರೂಮಿಗೇ ಬರದೇ ಹಗಲೂ ರಾತ್ರಿ ಡ್ಯೂಟಿ ಮಾಡುತ್ತಲೇ ಇರುತ್ತಾರೆ.!  ಬಹುತೇಕ ಹುಡುಗರಿಗೆ ಸುಳ್ಳಿನ ಸರಪಳಿ ಅನಿವಾರ್ಯವಾಗಿದ್ದರೆ ಇನ್ನು ಕೆಲವರಿಗೆ ಊರಿನ ಮತ್ತೊಂದು ಮಿಕ ಬೆಂಗಳೂರು ಸೇರಿ ಉದ್ದಾರಾಗುವುದು ಹೊಟ್ಟೆ ಉರಿಯ ಮ್ಯಾಟರ್ರು.  ಬೆಂಗಳೂರಿಗೆ ಹೋದ ಹೊಸತು. ಹೋಗುವ ಮೊದಲು ನಾಗಮಂಗಲ ಕಡೆಯ ಗೆಳೆಯನೊಬ್ಬನ ಕೋಣೆಯನ್ನು ಖಚಿತ ಪಡಿಸಿಕೊಂಡಿದ್ದೆ. 'ಅಯ್ಯೋ ಬಾ ಮಗಾ ನಾನಿದೀನಿ...' ಎಂದು ಥೇಟ್ ಕೃಷ್ಣ ಪರಮಾತ್ಮನ ಶೈಲಿಯಲ್ಲಿ ಅಭಯ ನೀಡಿದ್ದ. ಹೋಗಿ  ಇಳಿದ ನಂತರ ಆ ದರವೇಸಿಗೆ ಅದೇನಾಯ್ತೋ ಮುಖ ಗಂಟು ಹಾಕಿಕೊಂಡೇ ಸುಂಕದ ಕಟ್ಟೆಯಾಚೆಗಿನ ಅವನ ಮನ...

ಕೀಟ ಸಾಮ್ರಾಜ್ಯ ಹಾಗೂ ಆಧುನಿಕ ಕೃಷಿ

 ಮೊನ್ನೆ ಸಹಜ ಕೃಷಿ ಪದ್ಧತಿಯಲ್ಲಿ ಅಡಿಕೆ ಬೆಳೆಯುತ್ತಿರುವ ಶ್ರೀಯುತ. ಚಂದ್ರಶೇಖರ್ ಅವರ ತೋಟಕ್ಕೆ ಹೋಗಿದ್ದೆ. ಜೀವಾಮೃತವನ್ನಷ್ಟೇ ಬಳಸುತ್ತಿರುವ ಅವರು ಹನ್ನೆರಡು ವರ್ಷಗಳಿಂದ ಮಣ್ಣಿಗೆ ರಾಸಾಯನಿಕ ಗೊಬ್ಬರವನ್ನೇ ಸೋಕಿಸಿಲ್ಲವಂತೆ. ಆದರೂ ಸಹ ಇತರೇ ಬೆಳೆಗಾರರಿಗಿಂತ 20-30% ಹೆಚ್ಚು ಫಸಲು ತೆಗೆಯುತ್ತಿದ್ದಾರಂತೆ. ಅಡಿಕೆಯ ನಡುವೆ  ಬೆಳೆದಿರುವ ಎರಡು ವರ್ಷ ವಯಸ್ಸಿನ ರೋಬಸ್ಟಾ ಕಾಫಿ ಗಿಡಗಳು ನಾಲ್ಕು ವರ್ಷದ ಗಿಡಗಳಂತೆ ಬೆಳೆದಿವೆ.  ಕಳೆ, ಕೀಟ ನಾಶಕಗಳನ್ನು ಬಳಸುವುದರಿಂದ ಕೇವಲ‌ ಕಳೆಯನ್ನಷ್ಟೇ ಅಲ್ಲ, ಕೀಟ ಜಗತ್ತನ್ನೇ ಸರ್ವನಾಶ ಮಾಡುತ್ತಿದ್ದೇವೆನ್ನುವ ಕಿಂಚಿತ್ತು ಅರಿವಿಲ್ಲದ ರೈತರ ಬಗ್ಗೆ ಅವರು ಆತಂಕಗೊಂಡರು.  ನಾನು ಬರೆದಿರುವುದನ್ನು ಓದುವ ಕೃಷಿಕರು ಒಂದು ಕ್ಷಣ ಆಲೋಚಿಸಿ ನೋಡಿ. ರಾಸಾಯನಿಕ ವಿಷವನ್ನು ಬಳಸಿ ನಾವು ಕೊಲ್ಲುತ್ತಿರುವುದಾದರೂ ಯಾವುದನ್ನು!?  ಕಳೆಗೆ ಸಿಂಪಡಿಸುವ ರಾಸಾಯನಿಕವು ಕಳೆಯಿಂದ ನೆಲಕ್ಕಿಳಿದು ಕಣ್ಣಿಗೆ ಕಾಣದ, ಜೀವ ವೈವಿಧ್ಯದ ಅಮೂಲ್ಯ ಭಾಗವಾದ ಲಕ್ಷಾಂತರ, ಕೋಟ್ಯಾಂತರ ಕ್ರಿಮಿ, ಕೀಟಗಳನ್ನು ಅನಾಮತ್ತು ಕೊಲ್ಲುತ್ತಿರುವುದರ ಬಗ್ಗೆ ಔಷಧಿಯ ಹೆಸರಿನಲ್ಲಿ ಹಣ್ಣು, ಸೊಪ್ಪು, ತರಕಾರಿಯಿಂದ್ಹಿಡಿದು ತಿನ್ನುವ ಅನ್ನಕ್ಕೂ ವಿಷವಿಕ್ಕುತ್ತಿರುವ ನಾವು ಯೋಚಿಸಿದ್ದೇವೆಯಾ ? ಯೋಚಿಸುತ್ತೇವೆಯಾ ?  ನಾವು ಔಷಧವೆಂದು ಬಳಸುತ್ತಿರುವ ರಾಸಾಯನಿಕವು ಔಷಧಿಯೇ ಆಗಿದ್ದಿದ್ದಲ್ಲಿ ನಮ್ಮ ತೋಟ, ನಮ್ಮ ಹೊ...